ಮಂಡ್ಯ: ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟಲು ವೃಕ್ಷ ಸಂವರ್ಧನೆ ಮತ್ತು ಸಂರಕ್ಷಣೆಯೇ ಏಕೈಕ ಮಾರ್ಗವಾಗಿದ್ದು, ರಾಜ್ಯದ ಹಸಿರು ಹೊದಿಕೆಯನ್ನು ಹೆಚ್ಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ 7 ವಲಯಗಳಲ್ಲಿರುವ ನರ್ಸರಿಗಳಲ್ಲಿ ತೇಗ, ಶ್ರೀಗಂಧ, ಹೊನ್ನೆ ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಹಲವೆಡೆ ಕಾಡುತ್ತಿರುವ ಚಿರತೆ ಸಮಸ್ಯೆಗೆ ಕೂಡಲೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಕಾಡಿನಂಚಿನ ಗ್ರಾಮಸ್ಥರೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳುವ ಮೂಲಕ ಕಾಡ್ಗಿಚ್ಚು, ಕಳ್ಳಬೇಟೆ ಮತ್ತು ಅರಣ್ಯ ಅಪರಾಧಗಳನ್ನು ತಡೆಗಟ್ಟಲು ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಅರಣ್ಯ ಪ್ರದೇಶಗಳು, ಕಾಡಿನಂಚಿನ ಪಟ್ಟಾ ಜಮೀನು ಹಾಗೂ ಸರ್ಕಾರಿ ಜಾಗಗಳಲ್ಲಿ ಬೆಳೆದಿರುವ ಶ್ರೀಗಂಧ, ರಕ್ತಚಂದನ, ಬೀಟೆ ಮತ್ತು ತೇಗದಂತಹ ಬೆಲೆಬಾಳುವ ಮರಗಳನ್ನು ಜಿಐ ಟ್ಯಾಗ್ ಮಾಡಬೇಕು. ಈ ಮೂಲಕ ಅರಣ್ಯ ಸಂಪತ್ತು ಕಳುವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು. ಇದೇ ವೇಳೆ, ಆನೆ-ಮಾನವ ಸಂಘರ್ಷ ನಿಯಂತ್ರಿಸುವ ನಿಟ್ಟಿನಲ್ಲಿ ಈ ತಿಂಗಳಲ್ಲೇ ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ಹಾಗೂ ಸೌರಬೇಲಿ ನಿರ್ಮಾಣದ ಕುರಿತು ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.



