ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಯರ್ತಿಗಾನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಸೂರಿಲ್ಲದೆ ಬದುಕುತ್ತಿದ್ದ ನಿರಾಶ್ರಿತ ಮಹಿಳೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಕ್ಕ ಪಡೆ ತಂಡ ಮಾನವೀಯ ನೆರವು ನೀಡಿದ್ದು, ಸುರಕ್ಷಿತ ಆಶ್ರಯ ವ್ಯವಸ್ಥೆ ಕಲ್ಪಿಸಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಸರ್ಕಾರಿ ಶಾಲೆ ಹಾಗೂ ತಂಗುದಾಣಗಳಲ್ಲಿ ಮಹಿಳೆ ಆಶ್ರಯ ಪಡೆದಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಕ್ಷಣ ಕ್ರಮ ಕೈಗೊಂಡಿತು.
ಈ ಕುರಿತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಮಾಹಿತಿ ನೀಡಿ, ವಿಶೇಷ ಅಕ್ಕ ಪಡೆ ತಂಡವನ್ನು ರಚಿಸಿ ಗ್ರಾಮಕ್ಕೆ ಭೇಟಿ ನೀಡಲಾಗಿದೆ. ಬಳಿಕ ಮಹಿಳೆಯನ್ನು ರಕ್ಷಿಸಿ ಪವಿತ್ರ ಟ್ರಸ್ಟ್ನಲ್ಲಿ ಸುರಕ್ಷಿತ ಆಶ್ರಯ ಹಾಗೂ ಪುನರ್ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಹಿಳೆಯ ಆರೋಗ್ಯ ಮತ್ತು ಭದ್ರತೆ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಶಾಶ್ವತ ಪುನರ್ವಸತಿ ಕಲ್ಪಿಸಲು ಇಲಾಖೆ ಕ್ರಮ ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಸಾರ್ವಜನಿಕರು ಇಲಾಖೆಯ ತ್ವರಿತ ಕಾರ್ಯಾಚರಣೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


