ಉಡುಪಿ: ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಠದ ಆಡಳಿತ ಮಂಡಳಿ ಹಲವು ಹೊಸ ವ್ಯವಸ್ಥೆಗಳನ್ನು ಜಾರಿಗೆ ತಂದಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ದರ್ಶನಕ್ಕಾಗಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ನೆರವಾಗುವ ಉದ್ದೇಶದಿಂದ ಶಾಶ್ವತ ಚಾವಣಿ ವ್ಯವಸ್ಥೆ ಕಲ್ಪಿಸಲಾಗಿದೆ.
ಭಕ್ತರು ದರ್ಶನಕ್ಕಾಗಿ ಕಾಯುವ ಪ್ರದೇಶಗಳಲ್ಲಿ ನೆರಳು ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು ಹಾಗೂ ತಂಪು ಪಾನೀಯ ಸೌಲಭ್ಯವನ್ನೂ ಒದಗಿಸಲಾಗಿದೆ.
ದರ್ಶನ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಕ್ತರ ದಟ್ಟಣೆ ನಿಯಂತ್ರಣಕ್ಕೂ ವ್ಯವಸ್ಥೆ ರೂಪಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಶೀಘ್ರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡುವ ಕುರಿತೂ ಚರ್ಚೆ ನಡೆದಿದೆ. ಸ್ಥಳೀಯ ಭಕ್ತರಿಗಾಗಿ ಪ್ರತ್ಯೇಕ ಕ್ಯೂ ವ್ಯವಸ್ಥೆ ಹಾಗೂ ಗುರುತಿನ ಚೀಟಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಮಠದ ಆಡಳಿತ ಮಂಡಳಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ಸಾಲಿನಲ್ಲಿ ಕಾಯುವ ಭಕ್ತರಿಗೆ ಫ್ಯಾನ್ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯವಸ್ಥೆಗಳನ್ನು ಕಲ್ಪಿಸುವ ಉದ್ದೇಶ ಹೊಂದಿರುವುದಾಗಿ ತಿಳಿದುಬಂದಿದೆ.


